
ದಾವಣಗೆರೆ: ಉಪಲೋಕಾಯುಕ್ತ ಬಿ.ವೀರಪ್ಪ ಅವರು ನಗರದ ವಿವಿಧೆಡೆ ಬುಧವಾರ ಬೆಳಿಗ್ಗೆ ಭೇಟಿ ನೀಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು. ಪಾಳು ಬಿದ್ದ ಬಾಬು ಜಗಜೀವನರಾಂ ಭವನದ ಅವ್ಯವಸ್ಥೆ ಕಂಡು ತೀವ್ರ ಅಸಮಾಧಾನ ಹೊರಹಾಕಿದರು. ಸಮಾಜ ಕಲ್ಯಾಣ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ ನೀಡಿದರು. ರಿಂಗ್ ರಸ್ತೆಯಲ್ಲಿ ಪಾಳು ಬಿದ್ದಿರುವ ಈ ಕಟ್ಟಡಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದರು. ಮುರಿದ ಗೇಟು, ಕಟ್ಟಡದ ಸುತ್ತ ಬೆಳೆದ ಕಳೆಗಿಡ, ಎಲ್ಲೆಂದರಲ್ಲಿ ಬಿದ್ದ ಕಸ ಹಾಗೂ ಕಣ್ಣಿಗೆ ರಾಚುತ್ತಿದ್ದ ಮದ್ಯದ ಬಾಟಲಿಗಳನ್ನು ಕಂಡು ಅಸಮಾಧಾನಗೊಂಡರು. ಮಹಾನಗರ ಪಾಲಿಕೆ ಆಯುಕ್ತ ರೇಣುಕಾ ಅವರನ್ನು ಪ್ರಶ್ನಿಸಿದರು. 2009ರಲ್ಲಿ ನಿರ್ಮಾಣವಾದ ಈ ಕಟ್ಟಡ ಅನೈತಿಕ ಚಟುವಟಿಕೆಯ ತಾಣವಾಗಿದೆ.

j3tvkannada
ಬಾಬು ಜಗಜೀವನರಾಂ ಅವರ ಹೆಸರಿಗೆ ಕಳಂಕ ತರುವ ಕೆಲಸವನ್ನು ಅಧಿಕಾಗಳು ಮಾಡಿದ್ದಾರೆ. ಆವರಣದ ಮುಂಭಾಗದ ಕಸ ಕೂಡ ತೆರವು ಮಾಡಿಲ್ಲ. ಕಟ್ಟಡದ ಪರಿಸ್ಥಿತಿ ಗಮನಿಸಿದರೆ ಅನೈತಿಕ ಚಟುವಟಿಕೆ ನಡೆಯುತ್ತಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಎಂದು ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದರು. ಬೆಳಿಗ್ಗೆ 6.30ಕ್ಕೆ ಎಪಿಎಂಸಿ ತರಕಾರಿ ಮಾರುಕಟ್ಟೆಗೆ ತೆರಳಿ ರೈತರ ಅಹವಾಲು ಆಲಿಸಿದರು. ತೂಕ ಮತ್ತು ಅಳತೆಯ ಯಂತ್ರಗಳನ್ನು ಪರಿಶೀಲಿಸಿದರು. ಶೌಚಾಲಯ, ಶುದ್ಧ ಕುಡಿಯುವ ನೀರಿನ ಘಟಕ ವೀಕ್ಷಿಸಿದರು. ತರಕಾರಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಿಸುವಂತೆ ಹಾಗೂ ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಎಪಿಎಂಸಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಚೀಟಿ ವ್ಯವಹಾರ ಸಂಪೂರ್ಣವಾಗಿ ನಿಲ್ಲಬೇಕು. ಕಮಿಷನ್ ಪಡೆಯುವಂತಿಲ್ಲ ಎಂಬ ಫಲಕ ಅಳವಡಿಸಿದ್ದರೂ ಕೆಲ ದಲ್ಲಾಳಿಗಳು ರೈತರಿಂದ ಕಮಿಷನ್ ವಸೂಲಿ ಮಾಡುತ್ತಿದ್ದಾರೆ. ಇದನ್ನು ವ್ಯಾಪಾರಿಗಳೇ ಒಪ್ಪಿಕೊಂಡಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು. ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ರೈತಸ್ನೇಹಿಯಾಗಿ ರೂಪಿಸಬೇಕು ಎಂದು ಸೂಚಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ ಹಾಗೂ ದಾವಣಗೆರೆ ತಾಲ್ಲೂಕಿನ ಆವರಗೊಳ್ಳದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಉಪಲೋಕಾಯುಕ್ತರ ಭೇಟಿಯ ಹಿನ್ನೆಲೆಯಲ್ಲಿ ಎಲ್ಲೆಡೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು.