
ಚಿಕ್ಕಬಳ್ಳಾಪುರ: ಜಿಲ್ಲೆಯ ಮಾವು ಬೆಳೆಗಾರರ ಅನುಕೂಲಕ್ಕಾಗಿ ನಗರ ಹೊರವಲಯದ ಬೂರಗಮಾಕಲ ಹಳ್ಳಿಯಲ್ಲಿ ಸ್ಥಾಪಿಸಿರುವ ಮಾವು ಕೋಲ್ಲೋತ್ತರ ಅಭಿವೃದ್ಧಿ ಕೇಂದ್ರಕ್ಕೆ ಗ್ರಹಣ ಬಡಿದಿದೆ. ಸರ್ಕಾರ ಮತ್ತು ರಾಜ್ಯ ಮಾವು ಅಭಿವೃದ್ಧಿ ಮಂಡಳಿಯ ನಿರ್ಲಕ್ಷ್ಯದಿಂದ ಇಲ್ಲಿ ಚಟುವಟಿಕೆಯೇ ಸ್ಥಬ್ದವಾಗಿದೆ. ಬೂರಗಮಾಕಲಹಳ್ಳಿಯ ಬಳಿ ₹ 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಕೇಂದ್ರದಲ್ಲಿ ಅಧಿಕಾರಿ, ಸಿಬ್ಬಂದಿ ಕೊರತೆಯಿಂದ ಬಹುತೇಕ ಚಟುವಟಿಕೆಗಳು ಸ್ಥಗಿತವಾಗಿವೆ.

j3tvkannada
2 ಎಕರೆಯಲ್ಲಿ ತರಬೇತಿ ಕೇಂದ್ರ, ಅಧಿಕಾರಿಗಳ ಕೊಠಡಿಗಳು, ಪ್ರಾತ್ಯಕ್ಷಿಕೆ ಕೇಂದ್ರ, ಮಾವಿನ ಗ್ರೇಡಿಂಗ್ ಕೇಂದ್ರ, ಮಾಗಿಸುವ ಘಟಕ, ಬೇರೆ ಬೇರೆ ಜಿಲ್ಲೆಗಳಿಂದ ರೈತರು ಉಳಿದುಕೊಳ್ಳಲು 50 ಜನರಿಗೆ ವಸತಿ ಸೌಲಭ್ಯ, ಅಧಿಕಾರಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳ ವಿಶ್ರಾಂತಿ ಗೃಹ ಸೇರಿದಂತೆ ಸುಸಜ್ಜಿತ ಕಟ್ಟಡವಿದೆ. ಕಟ್ಟಡದ ಬಹುತೇಕ ಭಾಗ ಚಟುವಟಿಕೆರಹಿತವಾಗಿದೆ. ರಾಜ್ಯದಲ್ಲಿ 1.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ಅದರಲ್ಲಿ ಶೇ 40 ರಷ್ಟು ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೊಡುಗೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಿಂತಾಮಣಿ ಹಾಗೂ ಕೋಲಾರ ಜಿಲ್ಲೆಯಲ್ಲಿ ಶ್ರೀನಿವಾಸಪುರ ತಾಲ್ಲೂಕು ಪ್ರಥಮ ಸ್ಥಾನದಲ್ಲಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾವು ಬೆಳೆಯುವ ಪ್ರದೇಶ 15,778 ಹೆಕ್ಟೇರ್ ಇದೆ. ಈ ಪೈಕಿ ಚಿಂತಾಮಣಿ ತಾಲ್ಲೂಕಿನಲ್ಲಿಯೇ 7,947 ಹೆಕ್ಟೇರ್ ಪ್ರದೇಶವಿದೆ. ಈ ಎಲ್ಲ ಕಾರಣದಿಂದ ಜಿಲ್ಲೆಯ ಮಾವು ಬೆಳೆಗಾರರಿಗೆ ಅನುಕೂಲವಾಗಲಿ ಎಂದು ಮಾವು ಕೋಲ್ಲೋತ್ತರ ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಮಾವಿನ ಹಂಗಾಮು ಆರಂಭವಾಗಿದೆ. ಮಾವಿನ ವಿವಿಧ ತಳಿಗಳ ಕೊಯ್ಲೂ ನಡೆಯುತ್ತಿದೆ. ಮಾವು ಕೊಯ್ದು, ಹಣ್ಣಿನ ಸ್ವಚ್ಛತೆ, ಬಿಸಿನೀರಿನ ಉಪಚಾರ, ಮಾಗಿಸುವುದು, ಪ್ಯಾಕ್ ಮಾಡುವುದು, ರಫ್ತು, ಜತೆಗೆ ಬೆಳೆಗಾರರಿಗೆ ಗಿಡದ ನಾಟಿಯಿಂದ ಹಣ್ಣು ಬಿಡುವವರೆಗೂ ಋತುವಿಗೆ ತಕ್ಕಂತೆ ವಾರಕ್ಕೆ ಒಂದು ತರಬೇತಿ ನೀಡವುದು ಕೇಂದ್ರದ ಪ್ರಮುಖ ಕೆಲಸವಾಗಿದೆ. ಆದರೆ ಸಿಬ್ಬಂದಿಯ ಕೊರತೆಯಿಂದ ಕೇಂದ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಚಟುವಟಿಕೆಗಳು ನಡೆಯುತ್ತಿಲ್ಲ.

j3tvkannada
ಕೇಂದ್ರದಲ್ಲಿ ಮಾವಿನ ಜತೆಗೆ ವರ್ಷದ ಎಲ್ಲ ಕಾಲದಲ್ಲೂ ವಿವಿಧ ತರಕಾರಿಗಳನ್ನು ಸಹ ರಫ್ತು ಮಾಡಲಾಗುತ್ತಿದೆ. 2024 ರ ಡಿಸೆಂಬರ್ ನಿಂದ 2025 ರ ಏಪ್ರಿಲ್ 22 ರವರೆಗೆ 191 ಟನ್ ತರಕಾರಿ ಮತ್ತು ಸೊಪ್ಪನ್ನು ಹೊರ ದೇಶಗಳಿಗೆ ಕಳುಹಿಸಲಾಗಿದೆ. ತರಕಾರಿಯಲ್ಲೂ ಗುಣಮಟ್ಟವನ್ನು ಕಾಯ್ದುಕೊಂಡು ಸ್ವಚ್ಛಗೊಳಿಸಿ ಬೇಡಿಕೆಗೆ ತಕ್ಕಂತೆ ಪ್ಯಾಕ್ ಮಾಡಿ ಕಳುಹಿಸಲಾಗುತ್ತದೆ. ಕೇಂದ್ರದಿಂದ ಈ ವರ್ಷ ಏಪ್ರಿಲ್ನಲ್ಲಿ 104 ಟನ್ ಮಾವನ್ನು ಅಮೆರಿಕ, ಜರ್ಮನಿ, ಬ್ರಿಟನ್ಗೆ ರಫ್ತು ಮಾಡಲಾಗಿದೆ. ನೇರವಾಗಿ ಕೇಂದ್ರ ರಫ್ತು ಮಾಡುವುದಿಲ್ಲ. ಟೆಂಡರ್ ಮೂಲಕ ಖಾಸಗಿ ಸಂಸ್ಥೆಗಳಿಗೆ ನೀಡಲಾಗಿದೆ. ಮಾವು ಕೋಲ್ಲೋತ್ತರ ಅಭಿವೃದ್ಧಿ ಕೇಂದ್ರಕ್ಕೆ ಅಪೆಡಾ ಮತ್ತು ಎನ್.ಪಿ.ಪಿ.ಓ ನಿಂದ ಮಾನ್ಯತೆ ಇದೆ.ಅಪೆಡಾ ನೋಂದಾಯಿತ ರೈತರಿಂದ ಮಾವು ಖರೀದಿಸುತ್ತದೆ. ಹಣ್ಣನ್ನು ಸ್ವಲ್ಪ ತೊಟ ಇರುವಂತೆ ಕಟ್ ಮಾಡಿ ಕ್ರೇಟ್ ಗಳಲ್ಲಿ ತರಬೇಕು.
ಮಾವು ಅಭಿವೃದ್ಧಿ ಕೇಂದ್ರದಲ್ಲಿ ಗಾತ್ರ ಮತ್ತು ಗುಣಮಟ್ಟದ ಗ್ರೇಡಿಂಗ್ ಮಾಡಲಾಗುತ್ತದೆ. ಕೇಂದ್ರದಲ್ಲಿ ಸ್ವಚ್ಛಗೊಳಿಸಲಾಗುತ್ತದೆ. 48 ಡಿಗ್ರಿ ಸೆಲ್ಸಿಯಸ್ನಲ್ಲಿ ಒಂದು ಗಂಟೆ ಬಿಸಿ ನೀರಿನ ಉಪಚಾರ ಘಟಕದಲ್ಲಿ ಇಡಲಾಗುತ್ತದೆ. ಮತ್ತೆ ಸಾಮಾನ್ಯ ಸ್ಥಿತಿಗೆ ಬರಲು ಪ್ರೀ ಕೂಲಿಂಗ್ ನಲ್ಲಿ ಇರಿಸಲಾಗುತ್ತದೆ. ಇಥಲೀನ್ ಬಳಸಿ ಮಾಗಿಸಲಾಗುತ್ತದೆ. ಮೂರು ದಿನಗಳ ಕಾಲ ಅಲ್ಲೇ ಬಿಡಲಾಗುತ್ತದೆ. ನಂತರ ಬೇಡಿಕೆ ಅನುಗುಣವಾಗಿ ಬಾಕ್ಸ್ ಗಳಲ್ಲಿ ಹೊರ ದೇಶಗಳ ಪ್ರಕೃತಿಗೆ ತಕ್ಕಂತೆ ಕಾಯಿ, ಹಣ್ಣುಗಳನ್ನು ಪ್ಯಾಕ್ ಮಾಡಿಕೊಡಲಾಗುತ್ತದೆ. ಇಲ್ಲಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಕಳುಹಿಸಲಾಗುತ್ತದೆ. ಕನಿಷ್ಠ ಶುಲ್ಕವನ್ನು ನಿಗಧಿಪಡಿಸಲಾಗಿದೆ. ಗುಣಮಟ್ಟಕ್ಕೆ ಪ್ರಾಧಾನ್ಯ ಹಾಗೂ ಹೆಚ್ಚಿನ ಬೆಲೆ ಸಿಗುತ್ತದೆ ಎಂದು ಕೇಂದ್ರದ ಸಹಾಯಕ ನಿರ್ದೇಶಕಿ ರಮಾದೇವಿ ತಿಳಿಸಿದರು. ಕೇಂದ್ರವು ಮಾವಿನ ಚಿಗುರು, ಪೀಚು, ಕಾಯಿಯವರೆಗೂ ಬರುವ ರೋಗಗಳು ಮತ್ತು ಅವುಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ರೈತರ ತೋಟಗಳಲ್ಲೇ ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಡಬೇಕು.
ತೋಟಗಳಿಗೂ ತೆರಳಿ ಕಟಾವು ಮಾಡುವ ಬಗ್ಗೆ ತರಬೇತಿ ನೀಡುವುದು ಕೇಂದ್ರದ ಉದ್ದೇಶ. ರೈತರ ಎಲ್ಲ ಬೆಳೆಗಳಿಗೆ ವಸತಿಸಹಿತ ತರಬೇತಿ ನೀಡಲು ಅನುಕೂಲ ಒದಗಿಸಲಾಗಿದೆ. ಸಿಬ್ಬಂದಿಯ ಕೊರತೆಯಿಂದ ಯಾವುದೇ ತರಬೇತಿ ನಡೆಯುತ್ತಿಲ್ಲ ಎಂದು ರೈತರು ದೂರುತ್ತಾರೆ. ಬಹುರಾಷ್ಟ್ರೀಯ ಕಂಪನಿಗಳ ಜತೆ ಸಭೆಗಳನ್ನು ನಡೆಸಲಾಗಿದೆ. ಅವರು ರೈತರ ತೋಟಗಳಿಗೆ ತೆರಳಿ ನೇರವಾಗಿ ಮಾವು ಖರೀದಿಸುವರು. ಆನ್ ಲೈನ್ ಮಾರಾಟಕ್ಕೆ ರೈತರಿಗೆ ನೇರ ಲಿಂಕ್ ಒದಗಿಸಲಾಗುವುದು. ನೋಂದಣಿ ಮಾಡಿಕೊಂಡ ರೈತರಿಗೆ ಬೆಂಗಳೂರಿನ ವಿವಿಧ ಅಪಾರ್ಟ್ ಮೆಂಟ್ ಗಳೊಂದಿಗೆ ಹಾಗೂ ಅಂಚೆಕಚೇರಿಯ ಮೂಲಕ ದಲ್ಲಾಳಿಗಳ ಕಾಟವಿಲ್ಲದೆ ಗ್ರಾಹಕರಿಗೆ ಮಾರಾಟ ಮಾಡಬಹುದು ಎಂದು ಅಧಿಕಾರಿಗಳು ಹೇಳುತ್ತಾರೆ.