
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಶಕ್ತಿ ಹಾಗೂ ಯುವಕರ ನವಚೈತನ್ಯ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ತಿಳಿಸಿದರು.

j3tvkannada
ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮ ಪ್ರಸಾರವಾದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೋದಿ ಅವರು ತಮ್ಮ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ಭಾಷಣ ಮಾಡದೇ ದೇಶದ ರೈತರು, ಕಾರ್ಮಿಕರು, ಯುವಜನರು ಹಾಗೂ ಮಹಿಳೆಯರ ಬಗ್ಗೆ ಚರ್ಚಿಸುತ್ತಾರೆ. ಪ್ರತಿಯೊಬ್ಬರೂ ಕಾರ್ಯಕ್ರಮವನ್ನು ನೋಡುವಂತೆ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ದೇಶದಲ್ಲಿ ಶೇ 60ರಷ್ಟು ಯುವಕರಿದ್ದಾರೆ. ದುಡಿಯುವ ಕೈಗಳಿಗೆ ಬೆಂಬಲ ನೀಡಿದರೆ ದೇಶದ ಅಭಿವೃದ್ಧಿಯಾಗುವುದರಲ್ಲಿ ಸಂದೇಹವಿಲ್ಲ. ಈ ನಿಟ್ಟಿನಲ್ಲಿ ಪ್ರಧಾನಿ ಕ್ರಮ ಕೈಗೊಂಡಿದ್ದಾರೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ಏರ್ಪಟ್ಟಿದೆ. ಇದರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇದೀಗ ಜಾತಿ ಗಣತಿ ಜಾರಿಗೆ ತರುವುದಕ್ಕೆ ಮುಂದಾಗಿದ್ದು, ಕಾಂಗ್ರೆಸ್ ಪಕ್ಷದಲ್ಲೇ ಒಗ್ಗಟ್ಟಿಲ್ಲ. ಜಾತಿ ಗಣತಿ ಜಾರಿಯಾದರೆ ಸರ್ಕಾರ ಪತನ ಪ್ರಾರಂಭವಾದಂತೆ ಎಂದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್, ಮಂಡಲ ಅಧ್ಯಕ್ಷ ಮಲ್ಲೇಶಪ್ಪ, ಯುವ ಮೋರ್ಚಾ ಅಧ್ಯಕ್ಷ ಕಿರಣ್, ಬೂತ್ ಕಮಿಟಿ ಅಧ್ಯಕ್ಷ ರಂಗನಾಥ, ಶಂಕರ, ಪರಮೇಶ್ವರಪ್ಪ, ಮಂಜುನಾಥ, ಕಿರಣ್ ಕುಮಾರ್, ನಾಗರಾಜ (ಕಗ್ಗಿ), ಶ್ರೀನಿವಾಸ್, ರಘು, ಕೃಷ್ಣಮೂರ್ತಿ, ನಂಜುಂಡಿ, ಶ್ರೀಧರ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು