
ಧಾರವಾಡ: ಮಂಗಳೂರಿನಲ್ಲಿ ಸುಹಾಸ ಶೆಟ್ಟಿ ಕೊಲೆ ಖಂಡಿಸಿ ಹು-ಧಾ ಪೂರ್ವ ಮತ್ತು ಸೆಂಟ್ರಲ್ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ನಗರದ ದುರ್ಗದಬೈಲ್ನಲ್ಲಿ ಪ್ರತಿಭಟನೆ ನಡೆಸಿದರು.

j3tvkannada
ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಅವರು, ಕೊಲೆ ಮಾಡಿದವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದರು. ಬಳಿಕ ಮೌನಾಚರಿಸಿ, ಶ್ರದ್ದಾಂಜಲಿ ಸಲ್ಲಿಸಿದರು.
ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದಕ್ಕೆ ಮಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣವೇ ಸಾಕ್ಷಿ. ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ನಿರಂತರ ದಾಳಿ ಹಾಗೂ ಅವರನ್ನು ಕೊಲೆ ಮಾಡುತ್ತಿರುವುದು ಖಂಡನೀಯ.
ಇದನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಮತಾಂಧರ ಅಟ್ಟಹಾಸ ಎಲ್ಲೆ ಮೀರುತ್ತಿದ್ದು, ತಕ್ಷಣ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ಹು-ಧಾ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪೂರ್ವ ಕ್ಷೇತ್ರದ ಅಧ್ಯಕ್ಷ ಮಂಜುನಾಥ ಕಾಟಕರ, ಸೆಂಟ್ರಲ್ ಕ್ಷೇತ್ರ ಅಧ್ಯಕ್ಷ ರಾಜು ಕಾಳೆ, ದತ್ತಮೂರ್ತಿ ಕುಲಕರ್ಣಿ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ, ಅನೂಪ ಬಿಜವಾಡ, ರವಿ ನಾಯ್ಕ, ಉಮಾ ಮುಕುಂದ, ನಾಗರತ್ನಾ ಬಳ್ಳಾರಿ, ಮೇನಕಾ ಹುರಳಿ ಇದ್ದರು.