
ಹಾವೇರಿ: ಜಿಲ್ಲೆಯ ಬ್ಯಾಡಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ವಾ.ಕ.ರ.ಸಾ.ಸಂ) ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಕ ಎಂ. ಅವರು, ಗಲೀಜು ಕಂಡು ಅಸಮಾಧಾನ ವ್ಯಕ್ತಪಡಿಸಿದರು.

j3tvkannada
ಹುಬ್ಬಳ್ಳಿಯಿಂದ ಹಾವೇರಿ ಜಿಲ್ಲೆಗೆ ಶನಿವಾರ ಆಗಮಿಸಿದ್ದ ಪ್ರಿಯಾಂಕ ಅವರು ಬ್ಯಾಡಗಿ ಬಸ್ ಘಟಕ ಹಾಗೂ ಬಸ್ ನಿಲ್ದಾಣಗಳಲ್ಲಿ ಪರಿಶೀಲನೆ ನಡೆಸಿದರು. ಬ್ಯಾಡಗಿ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಇಲ್ಲದಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಬಸ್ ನಿಲ್ದಾಣ ಸ್ವಚ್ಛಗೊಳಿಸಬೇಕು. ನಿತ್ಯವೂ ಸ್ವಚ್ಛತೆ ಕಾಪಾಡಬೇಕು. ಬಸ್ ಕಾರ್ಯಾಚರಣೆ ಸುಧಾರಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಾವೇರಿ ಕೇಂದ್ರ ಬಸ್ ನಿಲ್ದಾಣಕ್ಕೂ ಪ್ರಿಯಾಂಕ ಅವರು ಭೇಟಿ ನೀಡಿದರು. ಸಾರಿಗೆಗಳ ವ್ಯವಸ್ಥಿತ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿದರು. ಬಸ್ಗಳು ಹಾಗೂ ಪ್ರಯಾಣಿಕರ ದಟ್ಟಣೆಯನ್ನು ವ್ಯವಸ್ಥಿತವಾಗಿ ನಿಯಂತ್ರಿಸಲು ಅಧ್ಯಯನ ಮಾಡಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ, ಅಶೋಕ ಪಾಟೀಲ, ಕೆ.ಆರ್.ನಾಯಕ್ ಇನ್ನಿತರು ಇದ್ದರು.